ಶಿವಮೊಗ್ಗ : ಇಲ್ಲಿನ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ ರಾಘವೇಂದ್ರ ಅವರು ನವ ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಭೇಟಿಯಾಗಿ ಹಲವು ವಿಷಯಗಳನ್ನು ಚರ್ಚೆ ಮಾಡಿ ಅಗತ್ಯ ಅನುದಾನ ಬಿಡುಗಡೆಗೆ ಮನವಿ ಮಾಡಿದ್ದಾರೆ.
ಅಡಿಕೆ ಬೆಳೆಗಾರರ ಸಹಾಯಧನ ಬಿಡುಗಡೆಗೆ ಸರ್ಕಾರಕ್ಕೆ ಮನವಿ
ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಯ ಮೂಲಕ ರಾಜ್ಯದ ಅಡಿಕೆ ಕೃಷಿ ಬೆಳೆಗಾರರ ರೈತ ಸಮುದಾಯ ಕೃಷಿ ಇಲಾಖೆಗಳ ನಡುವೆ ಸೇತುವೆಯಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಾಯೋಚಿತ ಯೋಜನೆ ಅಡಿಯಲ್ಲಿ ರೈತರು ಈಗಾಗಲೇ ಮಂಜೂರಾದ ಕೃಷಿ ಸಂಸ್ಕರಣಾ ಘಟಕಕ್ಕೆ 50 % ರಷ್ಟು ಸಬ್ಸಿಡಿ ಹಣವನ್ನು ಪಡೆದುಕೊಂಡಿದ್ದು, ಬಾಕಿ ಇರುವ ನಬಾರ್ಡ್ ಸಬ್ಸಿಡಿ ಹಣವನ್ನು ಆದಷ್ಟು ಬೇಗ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವನ್ನು ಪ್ರಸಾದ್ ಯೋಜನೆಯಡಿ ಅಭಿವೃದ್ಧಿಪಡಿಸುವುದು
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವನ್ನು ಪ್ರಸಾದ್ ಯೋಜನೆ ಅಡಿ ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಕೊಲ್ಲೂರು ಮೂಕಾಂಬಿಕಾ ದೇವಾಲಯವು ದಕ್ಷಿಣ ಭಾರತದ ಆಧ್ಯಾತ್ಮಿಕ ಕ್ಷೇತ್ರದ ಮೂಲಾಧಾರವಾಗಿದೆ. ಭೌಗೋಳಿಕತೆ ಮತ್ತು ಆಧ್ಯಾತ್ಮಿಕತೆಯ ಸಮಗ್ರ ದೃಷ್ಟಿಯಿಂದ ಪ್ರವಾಸೋದ್ಯಮದ ಅಭಿವೃದ್ಧಿಗೆ ಉತ್ತಮ ಅವಕಾಶ ಇರುವುದರಿಂದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವನ್ನು ಪ್ರವಾಸೋದ್ಯಮ ಸಚಿವಾಲಯ ತೀರ್ಥಯಾತ್ರೆಯ ಮೂಲ ಸೌಕರ್ಯ ಅಭಿವೃದ್ಧಿಗಾಗಿ ಪ್ರಸಾದ್ ಯೋಜನೆ ಅಡಿ ಅಭಿವೃದ್ಧಿಪಡಿಸಲು ಮನವಿ ಮಾಡಿದ್ದಾರೆ.
ಸಿ.ಜಿ.ಹೆಚ್ಎ.ಸ್ ಆಸ್ಪತ್ರೆ ಕಾರ್ಯಾರಂಭಕ್ಕೆ ಸೂಕ್ತ ಅನುದಾನ ಮತ್ತು ಸಿಬ್ಬಂದಿ ನೇಮಕಕ್ಕೆ ಮನವಿ
ಕರ್ನಾಟಕ ರಾಜ್ಯದ ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರು ಮತ್ತು ಅವರ ಕುಟುಂಬಗಳು ಸಿಜಿಎಚ್ಎಸ್ ಕ್ಷೇಮ ಕೇಂದ್ರವನ್ನು ಪ್ರಾರಂಭಿಸುವಂತೆ ಮನವಿಗಳನ್ನು ಸಲ್ಲಿಸಿದರು. ಈ ಕುರಿತಂತೆ ಸಿ.ಜಿ.ಹೆಚ್ಎಸ್ ಕ್ಷೇಮ ಕೇಂದ್ರವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ತೆರೆಯುವಂತೆ ಸಂಸದರಾದ ಬಿ.ವೈ ರಾಘವೇಂದ್ರ ಅವರು ಕೇಂದ್ರ ಸರ್ಕಾರದ ಮೇಲೆ ನಿರಂತರ ಒತ್ತಡವನ್ನು ಹಾಕಿದ್ದರು. ಪರಿಣಾಮವಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಕರ್ನಾಟಕದ ಶಿವಮೊಗ್ಗ ಮಂಗಳೂರು ಉಡುಪಿ ಜಿಲ್ಲೆಯಲ್ಲಿ ಸಿಜಿಹೆಚ್ ಎಸ್ ಕ್ಷೇಮ ಕೇಂದ್ರಗಳ ಸ್ಥಾಪನೆಗೆ ಅನುಮೋದನೆ ನೀಡಿದೆ. ಈ ವಿಷಯವಾಗಿ ಸಕಾರಾತ್ಮಕವಾಗಿ ಸ್ಪಂದಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಗತ್ಯ ಅನುದಾನಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.