ಸಾಗರ : ಪ್ರತಿಭೆಗಳಿಗೆ ಮುಕ್ತ ಅವಕಾಶ ಕಲ್ಪಿಸಿದಾಗ ಮಾತ್ರ ತಮ್ಮ ಸಾಮರ್ಥ್ಯವನ್ನು ಹೊರಹಾಕಲು ಸಾಧ್ಯವಾಗುತ್ತದೆ ಎಂದು ಪ್ರತಿಭಾ ಕಾರಂಜಿ ತಾಲ್ಲೂಕು ನೋಡಲ್ ಅಧಿಕಾರಿ ವಿ.ಟಿ.ಸ್ವಾಮಿ ಹೇಳಿದರು.
ಅವರು ಇಲ್ಲಿನ ಸಾಧನಾ ವಿದ್ಯಾಕೇಂದ್ರದಲ್ಲಿ ಆನಂದಪುರ ವಲಯಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರತಿಭೆಗಳನ್ನು ಹೊರ ಹಾಕಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ. ಸ್ಪರ್ಧೆಗಳಲ್ಲಿ ಗುಣಾತ್ಮಕತೆ ಇರಬೇಕು. ಜೊತೆಯಾಗಿ ಅದಕ್ಕೆ ಪೂರಕವಾದ ಆಸಕ್ತಿ, ಅಧ್ಯಯನ ಅತಿ ಮುಖ್ಯವಾಗಿದೆ. ಪಠ್ಯದ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಲ್ಲಿ ಬದುಕಿಗೆ ಸ್ಪೂರ್ತಿಯಾಗಲಿದೆ. ಶಿಕ್ಷಣದಲ್ಲಿ ಅಂಕಗಳ ಜೊತೆಗೆ ಮೌಲ್ಯ, ಸಂಸ್ಕೃತಿ, ಸಂಸ್ಕಾರ ಬೆಳೆಸಿಕೊಳ್ಳಬೇಕು. ಇದರಿಂದ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ. ಮಕ್ಕಳ ಪ್ರತಿಭೆಗೆ ಶಿಕ್ಷಕರು ಪೋಷಕರ ಮಾರ್ಗದರ್ಶನ ನೀಡುವ ಮೂಲಕ ಮಕ್ಕಳ ಯಶಸ್ಸಿಗೆ ಮುಂದಾಗಬೇಕು ಎಂದು ಕರೆ ನೀಡಿದರು.
ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಭೂಮೇಶ್ ಎ.ಹೆಚ್. ಮಾತನಾಡಿ, ಮಕ್ಕಳ ಮನಸ್ಸನ್ನು ಸರಿಯಾಗಿ ಅರ್ಥ ಮಾಡಿಕೊಂಡು ಅವರಿಗೆ ಕಲಿಸುವ ಕೆಲಸ ಆಗಬೇಕಾಗಿದೆ. ತನ್ನೋಳಗೆ ಅಡಗಿರುವ ಪ್ರತಿಭೆಗಳನ್ನು ಹೊರಹಾಕಲು ಇಂತಹ ಸಂದರ್ಭಗಳನ್ನು ಬಳಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ನಿರಂತರ ಪರಿಶ್ರಮ ಬೇಕಾಗಿದೆ. ಬೆಳೆಯುವ ಪ್ರತಿಭೆಗಳಿಗೆ ಮಾರ್ಗದರ್ಶನದ ಅವಶ್ಯಕತೆ ಇದೆ ಎಂದು ಹೇಳಿದರು.
ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಮಹಾಬಲೇಶ್ವರ ಮಾತನಾಡಿ, ಪ್ರತಿಭಾವಂತರಿಗೆ ಯಾವುದೇ ಕೊರತೆ ಇಲ್ಲ. ಆದರೇ ಅವರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಆಗಬೇಕಾಗಿದೆ. ಪ್ರಾಥಮಿಕ ಹಂತದಲ್ಲಿಯೆ ಸೂಕ್ತ ತರಬೇತಿ ನೀಡಿದರೆ ಹೆಮ್ಮರವಾಗಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಸಾಧನಾ ವಿದ್ಯಾಕೇಂದ್ರ ವಾಣಿಶ್ರೀ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ವೇದಿಕೆಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಉಪಪ್ರಾಂಶುಪಾಲ ಈಶ್ವರಪ್ಪ, ಯಡೇಹಳ್ಳಿ ಇಂದಿರಾಗಾಂಧಿ ವಸತಿ ಶಾಲೆಯ ಪ್ರಾಂಶುಪಾಲ ಚಂದ್ರಶೇಖರ್, ಖಾಸಗಿ ಶಾಲೆಗಳ ನೌಕರರ ಸಂಘದ ಅಧ್ಯಕ್ಷರಾದ ಮಂಜಪ್ಪ, ಮಲೆನಾಡು ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶೇಖರಪ್ಪ, ಸಾಧನಾ ಶಾಲೆಯ ಮುಖ್ಯ ಶಿಕ್ಷಕ ಮಂಜುನಾಥ, ಪ್ರಮುಖರಾದ ಸುಜಾತ, ನಯನ ಉಪಸ್ಥಿತರಿದ್ದರು.





