ಸಾಗರ : ತಾಲ್ಲೂಕಿನ ಆನಂದಪುರದಲ್ಲಿ ಅಸಮರ್ಪಕ ವಿದ್ಯುತ್ ಪೂರೈಕೆ ಹಾಗೂ ಸಿಬ್ಬಂದಿಗಳ ವರ್ತನೆ ಖಂಡಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು.
ಸಮೀಪದ ಯಡೇಹಳ್ಳಿಯಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿದ ರೈತ ಮುಖಂಡರು ನಂತರ ಯಡೇಹಳ್ಳಿಯಿಂದ ಆನಂದಪುರದ ಮೆಸ್ಕಾಂ ಕಚೇರಿ ವರೆಗೂ ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದರು.
ಆನಂದಪುರದ ಸುತ್ತಮುತ್ತಲಿನ 8 ಗ್ರಾಮ ಪಂಚಾಯಿತಿಗಳ ನೂರಾರು ಗ್ರಾಮಗಳಿಗೆ ಕಳೆದ 20 ದಿನಗಳಿಂದ ಅಸಮರ್ಪಕ ವಿದ್ಯುತ್ ಪೂರೈಕೆಯಿಂದಾಗಿ ರೈತರಿಗೆ ಆಗುತ್ತಿರುವ ತೊಂದರೆಗಳನ್ನು ಖಂಡಿಸಿ ಪ್ರತಿಭಟನೆ ಮಾಡಿದರು.
ಶಿವಮೊಗ್ಗ ಜಿಲ್ಲಾ ರೈತ ಸಂಘದ ಜಿಲ್ಲಾಧ್ಯಕ್ಷರಾದ ದಿನೇಶ್ ಶಿರವಾಳ ಮಾತನಾಡಿ, ಕಳೆದ 20 ದಿನಗಳಿಂದ ಅಸಮರ್ಪಕ ವಿದ್ಯುತ್ ಪೂರೈಕೆಯಿಂದಾಗಿ ರೈತರಿಗೆ ಜನಸಾಮಾನ್ಯರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇದಲ್ಲದೆ ಸರಿಯಾದ ಸಮಯಕ್ಕೆ ವಿದ್ಯುತ್ ಪರಿವರ್ತಕಗಳ ವಿತರಣೆ ಆಗದಿರುವುದನ್ನು ಖಂಡಿಸಿ ಹೋರಾಟಕ್ಕೆ ಕರೆ ನೀಡಲಾಗಿದೆ ಎಂದು ಹೇಳಿದರು.
ಈ ಪ್ರತಿಭಟನೆಯಲ್ಲಿ ಭಾಗಿಯಾಗಿರುವುದು ಕೇವಲ ರೈತ ಮುಖಂಡರ ತೋಟ ಹೊಲ ಮನೆಗಳಿಗೆ ವಿದ್ಯುತ್ ಸಮಸ್ಯೆ ಆಗಿರುವುದಕ್ಕೆ ಅಲ್ಲ. ಸಂಪೂರ್ಣ ರೈತ ಸಮೂಹ ಹಾಗೂ ಜನಸಾಮಾನ್ಯರಿಗೆ ಪರಿಹಾರ ಕಂಡುಕೊಳ್ಳಬೇಕೇನೋ ಉದ್ದೇಶದಿಂದ ಈ ಪ್ರತಿಭಟನೆಗೆ ಕರೆ ನೀಡಲಾಗಿದೆ.
ಶಾಸಕರ ಹೇಳಿಕೆಯನ್ನು ಖಂಡಿಸಿದ ದಿನೇಶ್ ಶಿರವಾಳ
ರೈತ ಸಂಘಟನೆಗಳು ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರೆ ಎಂಬ ಹೇಳಿಕೆಯನ್ನು ಶಾಸಕರು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ತಮ್ಮ ಸ್ಥಾನಕ್ಕೆ ಗೌರಯುತವಾಗಿ ನಡೆದುಕೊಳ್ಳಬೇಕು. ಶಾಸಕರು ತಾಲ್ಲೂಕಿನ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ರಾಜ್ಯಕ್ಕೆ ಬೆಳಕು ನೀಡಲು ಬದುಕನ್ನ ಭೂಮಿಯನ್ನು ತ್ಯಾಗ ಮಾಡಿದ ಜನರಿಗೆ ನಿರಂತರ ವಿದ್ಯುತ್ ನೀಡುವಲ್ಲಿ ಸದನದಲ್ಲಿ ಗಟ್ಟಿ ಧ್ವನಿಯಲ್ಲಿ ಪ್ರಸ್ತಾಪ ಮಾಡಬೇಕು ಎಂದು ಒತ್ತಾಯಿಸಿದರು.
ರೈತ ಸಂಘದ ಹಿರಿಯ ಹೋರಾಟಗಾರ ರಾಜಶೇಖರ್. ಟಿ. ಮಾತನಾಡಿ, ರೈತರಿಗೆ ನೀಡಬೇಕಾಗಿದ್ದ ವಿದ್ಯುತ್ ಮಲ್ಟಿ ನ್ಯಾಷನಲ್ ಕಂಪನಿಗಳಿಗೆ ಮಾರಾಟ ಮಾಡುತ್ತಿದ್ದಾರೆ. ರೈತರು ಎಲ್ಲಿವರೆಗೆ ಸಂಘಟಿತರಾಗುವುದಿಲ್ಲವೋ ಸಂಘಟಿತ ಹೋರಾಟ ಮಾಡುವುದಿಲ್ಲವೋ ಅಲ್ಲಿಯವರೆಗೂ ಸರ್ಕಾರ ರೈತರನ್ನು ಒಡೆದು ಆಳುವ ನೀತಿಯನ್ನು ಮುಂದುವರಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಲಾಖಾ ಅಧಿಕಾರಿಗಳು ಸಮರ್ಪಕ ವಿದ್ಯುತ್ ಪೂರೈಕೆ ಹಾಗೂ ಕೆಲ ಸಿಬ್ಬಂದಿಗಳ ವರ್ಗಾವಣೆಯ ಭರವಸೆ ನೀಡಿದ ನಂತರ ರೈತ ಸಂಘಟನೆಗಳು ಪ್ರತಿಭಟನೆಯನ್ನು ಹಿಂಪಡೆದರು.





