ರಾಜ್ಯದಲ್ಲಿ ಮತ್ತೆ ಆತಂಕ ಸೃಷ್ಟಿಸಿದ ಕಸ್ತೂರಿ ರಂಗನ್ ವರದಿ ಅಧಿಸೂಚನೆ : ಸೆ.3 ರಂದು ಸಾಗರದಲ್ಲಿ ಪ್ರತಿಭಟನೆ
ಸಾಗರ : ರಾಜ್ಯದಲ್ಲಿ ಮತ್ತೆ ಕಸ್ತೂರಿ ರಂಗನ್ ವರದಿ ಅಧಿಸೂಚನೆ ರೈತರಲ್ಲಿ ಆತಂಕ ಸೃಷ್ಟಿಸಿದ್ದು, ಈ ವರದಿ ಜಾರಿಯಾದರೆ ರೈತರಿಗೆ ಮರಣ ಶಾಸನವಾಗಲಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಈ ವರದಿ ಜಾರಿಯಾಗಬಾರದು ಎಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು ಹೇಳಿದರು.
ರೈತರಲ್ಲಿ ಆತಂಕ ಸೃಷ್ಟಿಸಿದ ಈ ವರದಿಯನ್ನು ಪಕ್ಷಾತೀತವಾಗಿ ವಿರೋಧಿಸಬೇಕು. ಸರ್ಕಾರಗಳು ಬದಲಾದಂತೆ ಆರೋಪ ಪ್ರತ್ಯಾರೋಪಗಳಿಗೆ ಸೀಮಿತವಾಗದೆ ರೈತರ ಪರವಾಗಿ ಪ್ರತಿಯೊಂದು ಪಕ್ಷಗಳು ನಿಲ್ಲಬೇಕಾಗಿದೆ ಎಂದು ಹೇಳಿದರು.
ಈ ಹಿನ್ನಲೆಯಲ್ಲಿ ಸೆಪ್ಟೆಂಬರ್ 3 ರಂದು ಸಾಗರದಲ್ಲಿ ಸಹಕಾರಿ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಹೋರಾಟವನ್ನು ಹಮ್ಮಿಕೊಳ್ಳಲಾಗಿದ್ದು, ಇದು ಪಕ್ಷಾತೀತ ಹೋರಾಟವಾಗಿದೆ. ಈ ಪ್ರತಿಭಟನೆಗೆ ಬಿಜೆಪಿ ಸಹ ಬೆಂಬಲ ನೀಡಿದ್ದು, ಆನಂದಪುರದ ಕೃಷಿ ಪತ್ತಿನ ಸಹಕಾರ ಸಂಘ ಸಹ ಬೆಂಬಲ ಸೂಚಿಸಿದ್ದು, ಪ್ರತಿಯೊಬ್ಬರು ಹೋರಾಟದಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.
ಈ ಅಧಿಸೂಚನೆಯಿಂದ ಕರ್ನಾಟಕ ರಾಜ್ಯದ 10 ಜಿಲ್ಲೆಗಳನ್ನು ಒಳಗೊಂಡಂತೆ 20,668 ಚದರ ಕಿಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಲಾಗಿದೆ. ಈ ಜಿಲ್ಲೆಗಳ 39 ತಾಲೂಕಿನ 1449 ಗ್ರಾಮಗಳನ್ನ ಅಧಿಸೂಚನೆಯಲ್ಲಿ ಪರಿಸರ ಸೂಕ್ಷ್ಮ ವ್ಯಾಪ್ತಿಯಡಿ ನಮೂದಿಸಲಾಗಿದೆ.
ಈಗಿನ ಅರಣ್ಯ ಇಲಾಖೆಯ ಕಾನೂನುಗಳಿಂದಲೇ ರೈತರು ಸಾಕಷ್ಟು ಸಂಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಇನ್ನು ಈ ಕಸ್ತೂರಿರಂಗನ್ ವರದಿ ಜಾರಿಯಾದರೆ ರೈತರ ಪಾಲಿಗೆ ಮರಣ ಶಾಸನವಾಗಲಿದೆ. ಆದ್ದರಿಂದ ಪ್ರತಿಯೊಬ್ಬರೂ ಈ ಪಾದಯಾತ್ರೆ ಹಾಗೂ ಹೋರಾಟದಲ್ಲಿ ಪಾಲ್ಗೊಳ್ಳಬೇಕು.
ಈ ಹೋರಾಟದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ ಭಾಗವಹಿಸಲಿದ್ದಾರೆ. ಜೊತೆಗೆ ಸಂಸದರಾದ ಬಿ.ವೈ ರಾಘವೇಂದ್ರ ಸಹ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು.
ಅಧಿಕಾರಕ್ಕೆ ಬರುವಂತಹ ಸರ್ಕಾರಗಳು ಯಾವುದೇ ಅಧಿಸೂಚನೆಯನ್ನು ಹೊರಡಿಸುವ ಮೊದಲು ಜನರಿಗೆ ಹಾಗೂ ರೈತರಿಗೆ ಆಗುವಂಥ ಸಂಕಷ್ಟಗಳನ್ನು ಅರಿತು ಜಾರಿಗೆ ತರಬೇಕಾಗುತ್ತದೆ. ಇಂತಹ ಅಧಿಸೂಚನೆಗಳಿಂದ ನೂರಾರು ವರ್ಷಗಳಿಂದ ಬದುಕು ಕಟ್ಟಿಕೊಂಡ ರೈತರು ಎಲ್ಲಿಗೆ ಹೋಗಬೇಕು ಹಾಗೂ ಜೊತೆಗೆ ಈ ವರದಿಯಿಂದ ಅಭಿವೃದ್ಧಿಯು ಮರೀಚಿಕೆಯಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿರುವ ಜ್ವಲಂತ ಸಮಸ್ಯೆಗಳನ್ನ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕೆ ವಿನಃ ಅಧಿಸೂಚನೆಗಳು ಮಾರಕವಾಗಬಾರದು ಎಂದು ಹೇಳಿದರು.
ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಭರ್ಮಪ್ಪ, ರೇವಪ್ಪ, ದಲಿತ ಸಂಘರ್ಷ ಸಮಿತಿಯ ಸಂಚಾಲಕ ಹೊಸಕೊಪ್ಪ ರೇವಪ್ಪ ಇದ್ದರು.
ಸಂಪೂರ್ಣ ವಿಡಿಯೋ ಇಲ್ಲಿದೆ





