ಸಾಗರ : ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಯಲ್ಲಿ ಮಾತ್ರ ದೊರೆಯಲು ಸಾಧ್ಯ ಎಂದು ಶಾಸಕರಾದ ಗೋಪಾಲಕೃಷ್ಣ ಬೇಳೂರು ಹೇಳಿದರು.
ಅವರು ತಾಲೂಕಿನ ಆನಂದಪುರ ಸಮೀಪದ ಸಿದ್ಧೇಶ್ವರ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಹಾಗೂ ಕ್ರೀಡೋತ್ಸವ ಸಮಾರಂಭವನ್ನು ಉದ್ಘಾಟನೆ ಮಾಡಿ ಮಾತನಾಡಿದರು.
ಮಕ್ಕಳ ಶಿಕ್ಷಣದಲ್ಲಿ ಪೋಷಕರ ಪಾತ್ರ ಪ್ರಮುಖವಾದದ್ದು, ಶಾಲೆಯ ಜೊತೆ ಪೋಷಕರು ನಿರಂತರವಾದ ಸಂಪರ್ಕವನ್ನು ಇಟ್ಟುಕೊಳ್ಳಬೇಕು. ಆಗ ಮಾತ್ರ ಮಕ್ಕಳಿಗೆ ಸಾಂಸ್ಕೃತಿಕ ಕ್ರೀಡೆ ಸೇರಿದಂತೆ ಯಾವುದರಲ್ಲಿ ಆಸಕ್ತಿ ಇದೆ ಎಂಬುದನ್ನು ತಿಳಿಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಶಿಕ್ಷಣದಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಎರಡನೆ ಸ್ಥಾನದಲ್ಲಿದೆ. ಇದರಲ್ಲಿ ಸರ್ಕಾರಿ ಶಾಲೆಗಳೇ ಉತ್ತಮವಾದ ಫಲಿತಾಂಶವನ್ನು ನೀಡಿವೆ. ಪ್ರಸ್ತುತ ಜನರ ಆರ್ಥಿಕ ಪರಿಸ್ಥಿತಿ ಸುಧಾರಣೆ ಕಂಡ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ ಬೇಡವಾಗಿದೆ. ಕಾರಣ ತಮ್ಮ ಮಕ್ಕಳು ಖಾಸಗಿ ಶಾಲೆಯಲ್ಲಿ ಓದಬೇಕು, ಶಾಲಾ ವಾಹನದಲ್ಲಿ ಓಡಾಡಬೇಕು ಎನ್ನುವ ಮನೋಭಾವನೆ ಖಾಸಗಿ ಶಾಲೆಯತ್ತ ಮುಖ ಮಾಡುತ್ತಿದ್ದಾರೆ ಎಂದು ಹೇಳಿದರು.
ಮಕ್ಕಳಿಗೆ ಅತಿಯಾದ ಒತ್ತಡ ಹೇರಬೇಡಿ. ಶಿಕ್ಷಣದ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಹೆಚ್ಚಿನ ಆದ್ಯತೆ ನೀಡಿ. ಇದರಿಂದ ಮಕ್ಕಳು ಒತ್ತಡವಿಲ್ಲದೆ ಉತ್ತಮ ಫಲಿತಾಂಶವನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಮಕ್ಕಳಲ್ಲಿ ಉತ್ತಮವಾದ ಕಲೆ ಇದೆ. ಅದನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕು. ಮಕ್ಕಳನ್ನು ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಮಕ್ಕಳನ್ನು ಶಾಲೆಗೆ ಕಳಿಸುವ ಕೆಲಸವನ್ನು ಮಾತ್ರ ನೀವು ಮಾಡಿ, ಮುಂದಿನ ಕೆಲಸವನ್ನು ಸರ್ಕಾರವೇ ನೋಡಿಕೊಳ್ಳುತ್ತದೆ ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕರಾದ ಕುಮಾರಸ್ವಾಮಿ ಎ.ಡಿ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಮುರಳಿ. ಎನ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಗುರುರಾಜ್, ಉಪಾಧ್ಯಕ್ಷೆ ಮೂಕಾಂಬು, ಗ್ರಾಮ ಪಂಚಾಯಿತಿ ಸದಸ್ಯರಾದ ಶಂಕರ್, ಮೋಹನ್ ಕುಮಾರ್, ನೇತ್ರಾವತಿ ಮಂಜುನಾಥ್ ಪ್ರಮುಖರಾದ ಉಮೇಶ್ ಸುಬ್ರಹ್ಮಣ್ಯ ಡಿ ಆರ್, ನಾಗರಾಜ್, ಶಿಕ್ಷಕಿ ಶೋಭಾ ರಾಣಿ ಇನ್ನಿತರರು ಉಪಸ್ಥಿತರಿದ್ದರು.
ಸುದ್ದಿಯ ಸಂಪೂರ್ಣ ವಿಡಿಯೋ ಇಲ್ಲಿದೆ 👇👇





