ಸಾಗರ : ಮಕ್ಕಳು ಶಿಕ್ಷಣದಿಂದ ವಂಚಿತರಾದರೆ ಅಪರಾಧ ಪ್ರಕರಣಗಳಿಗೆ ದಾರಿಯಾಗುತ್ತದೆ. ಮಕ್ಕಳು ಶಿಕ್ಷಿತರಾಗದಿದ್ದರೆ ಅಪರಾಧ ಪ್ರಕರಣಗಳಿಗೆ ನೇರ ಕಾರಣವಾಗುತ್ತದೆ ಎಂದು ಆನಂದಪುರ ಪೊಲೀಸ್ ಠಾಣೆಯ ಪಿಎಸ್ಐ ಪ್ರವೀಣ್ ಕಳವಳ ವ್ಯಕ್ತಪಡಿಸಿದರು.
ಅವರು ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಂಬಾನಿ ಗ್ರಾಮದಲ್ಲಿ ರಾತ್ರಿ ಗ್ರಾಮ ವಾಸ್ತವ್ಯ ನಡೆಸಿ, ಜೊತೆಗೆ ಮನೆ ಮನೆಗೆ ಭೇಟಿ ನೀಡಿ ಗ್ರಾಮಸ್ಥರ ಕುಂದು ಕೊರತೆಗಳನ್ನು ಆಲಿಸಿದರು. ನಂತರ ಆನಂದಪುರ ಪೊಲೀಸ್ ಠಾಣೆ, ಬರೂರು ಗ್ರಾಮ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತವಾಗಿ ಆಯೋಜಿಸಿದ ಮಿಷನ್ ಸುರಕ್ಷಾ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣದ ಮೇಲೆ ಹೆಚ್ಚಿನ ಗಮನ ಹರಿಸಿದಾಗ, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದಾಗ ಮಕ್ಕಳನ್ನ ಅಪರಾಧ ಪ್ರಕರಣಗಳಿಂದ ದೂರವಿಡಬಹುದು. ಪೋಷಕರು ಸಹ ತಮ್ಮ ಮಕ್ಕಳು ಶಿಕ್ಷಣದಿಂದ ಹೊರಗೆ ಉಳಿಯದಂತೆ ನೋಡಿಕೊಳ್ಳಬೇಕು. ಇದರಿಂದ ಮಕ್ಕಳ ಭವಿಷ್ಯ ಉತ್ತಮವಾಗಿ ರೂಪಿಸಲು ಸಾಧ್ಯವಾಗುತ್ತದೆ. ಸಮಾಜದ ಸ್ಥಿತಿಗತಿಗಳಿಂದಾಗಿ ಪ್ರತಿ ವರ್ಷ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದೆ. ಹಾಗಾಗಿ ಶಿಕ್ಷಣದ ಕಡೆಗೆ ಪೋಷಕರು ವಿದ್ಯಾರ್ಥಿಗಳು ಹೆಚ್ಚಿನ ಗಮನ ನೀಡಬೇಕು. ಪೋಕ್ಸೋ ಕಾಯ್ದೆ ಅಡಿ ಕಠಿಣ ಕಾರಾಗೃಹ ಶಿಕ್ಷೆಗಳಿದ್ದು, ಹಾಗಾಗಿ ಪ್ರತಿಯೊಬ್ಬರೂ ಜಾಗೃತರಾಗಿರಬೇಕು ಎಂದು ಎಚ್ಚರಿಕೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಮಾತನಾಡಿ, ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಶಾಶ್ವತ ಬದಲಾವಣೆ ಸಾಧ್ಯ. ಪ್ರತಿಯೊಬ್ಬ ಮಗು ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಪಡಿಯಬೇಕು. ಜೊತೆಗೆ ಉತ್ತಮ ಶಿಕ್ಷಣ ಜೊತೆಗೆ ಸಂಸ್ಕಾರ ಹಾಗೂ ಜೀವನ ಮೌಲ್ಯಗಳು ಬೆಳೆಸುವ ಜವಾಬ್ದಾರಿ ಪೋಷಕರು ಹಾಗೂ ಶಿಕ್ಷಕರ ಮೇಲಿದೆ ಎಂದು ಕಿವಿ ಮಾತು ಹೇಳಿದರು.
ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಿದ್ದು, ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮೂಲಕ ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಗ್ರಾಮ ಸುಧಾರಣಾ ಸಮಿತಿಯ ಮುನಿಯಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಾಗರ ಬಿಆರ್ಸಿ ಸಮನ್ವಯಾಧಿಕಾರಿ ಡಾ. ಅನ್ನಪೂರ್ಣ, ಬರೂರು ಗ್ರಾಮ ಪಂಚಾಯತ್ ಪಿಡಿಒ ರಾಜು, ಇಸಿಒ ಪಾಲಾಕ್ಷಪ್ಪ, ಎಸ್ಡಿಎಂಸಿ ಅಧ್ಯಕ್ಷ ಪರಮೇಶ್ವರಪ್ಪ, ಮುಖ್ಯ ಶಿಕ್ಷಕ ಮಂಜಪ್ಪ, ಸಿಆರ್ಪಿ ಮಂಜುಳಾ, ಎಎಸ್ಐ ಸಿದ್ದಾರೂಡ, ಸತೀಶ್ ಸೇರಿದಂತೆ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.





